ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳು ಕಾರ್ಯನಿರ್ವಹಿಸದಿರುವುದು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಗಮನಕ್ಕೆ ಬಂದಿದೆ.
ಪರಿಶೀಲನೆ ವೇಳೆ ಹಡ್ಸನ್ ಸರ್ಕಲ್ನಿಂದ ಚಲೂಕ್ಯ ಸರ್ಕಲ್ವರೆಗಿನ ರಸ್ತೆಯಲ್ಲಿ ಒಟ್ಟು 222 ವಿದ್ಯುತ್ ಕಂಬಗಳನ್ನು ಪರಿಶೀಲಿಸಿದಾಗ 140 ಬೀದಿ ದೀಪಗಳು ಕಾರ್ಯನಿರ್ವಹಿಸುತ್ತಿರಲಿಲ್ಲ ಎಂಬುದು ಕಂಡುಬಂದಿದೆ.
ಬೀದಿ ದೀಪಗಳ ನಿರ್ವಹಣೆಗೆ ಹಣ ಮತ್ತು ಯೋಜನೆಗಳಿದ್ದರೂ ದೀಪಗಳು ಕಾರ್ಯನಿರ್ವಹಿಸದಿರುವುದು ಅಧಿಕಾರಿಗಳ ಜವಾಬ್ದಾರಿ ಮತ್ತು ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಮಸ್ಯೆಗಳನ್ನು ತಕ್ಷಣ ಗುರುತಿಸಿ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನಿರ್ಲಕ್ಷ್ಯ ಮುಂದುವರಿದರೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಇದರ ಜೊತೆಗೆ ಬೆಂಗಳೂರಿನ LED ಬೀದಿ ದೀಪ ಯೋಜನೆಯ ಪ್ರಗತಿಯನ್ನೂ ಪರಿಶೀಲಿಸಲಾಗಿದೆ. ನಗರದಲ್ಲಿ ಒಟ್ಟು 3,02,919 LED ದೀಪಗಳನ್ನು ಅಳವಡಿಸುವ ಯೋಜನೆಯಿದ್ದು, ಈವರೆಗೆ 2,67,270 ದೀಪಗಳನ್ನು ಅಳವಡಿಸಲಾಗಿದೆ. ಉಳಿದ ದೀಪಗಳ ಅಳವಡಿಕೆ ಹಾಗೂ ನಿಯಂತ್ರಣ ವ್ಯವಸ್ಥೆಯ ಕಾಮಗಾರಿಯನ್ನು ವೇಗಗೊಳಿಸುವಂತೆ ಸೂಚಿಸಲಾಗಿದೆ.
ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸುವುದರಿಂದ ರಾತ್ರಿ ವೇಳೆ ವಾಹನ ಸವಾರರು ಮತ್ತು ಪಾದಚಾರಿಗಳ ಸುರಕ್ಷತೆ ಹೆಚ್ಚಲಿದೆ. ಆದ್ದರಿಂದ ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.


